
ಹಾಸನ: ಮಧ್ಯಪ್ರದೇಶ ಸಿರಪ್ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲಿ ಕೂಡ ಈ ಬಗ್ಗೆ ಕ್ರಮ ವಹಿಸಲಾಗಿದೆ. ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್ ಒನ್ ಇದೆ. ಈ ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.
ವಿಧಾನಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹುಟ್ಟುಹಬ್ಬ ಹಿನ್ನೆಲೆ ಆರೋಗ್ಯ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಧ್ಯಪ್ರದೇಶದ ಘಟನೆ ಅತ್ಯಂತ ಆಘಾತಕಾರಿ. ಮಕ್ಕಳಿಗೆ ಔಷಧ ಕೊಡುವಾಗ ಎಚ್ಚರಿಕೆ ವಹಿಸಬೇಕು. ಇಂದು ಈ ಬಗ್ಗೆ ಒಂದು ಮಾರ್ಗಸೂಚಿ ಕೂಡ ಬಿಡುಗಡೆ ಮಾಡುತ್ತೇವೆ. ಈ ಹಿಂದೆ ಆರೋಗ್ಯ ಸುರಕ್ಷತೆ ಬಗ್ಗೆ ಯಾರೂ ಗಮನ ಹರಿಸಿರಲಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜನರಿಗೆ ಆಹಾರ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಕ್ರಮ ವಹಿಸಲಾಗಿದೆ. ಮಿನರಲ್ ವಾಟರ್ ತಯಾರಿಗೆ ಸಂಬಂಧ ಮತ್ತೊಂದು ಸುತ್ತಿನ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕರ್ನಾಟಕದಲ್ಲೂ ಎರಡು ಸಿರಪ್ ಪತ್ತೆ ಪ್ರಕರಣ ಕುರಿತು ಮಾತನಾಡಿ, ನಮ್ಮ ಇಲಾಖೆಯಿಂದ ಇಂದು ಮಾರ್ಗಸೂಚಿ ಬಿಡುಗಡೆ ಮಾಡುತ್ತಾರೆ. ಯಾವ ರೀತಿ ಎಚ್ಚರಿಕೆ ವಹಿಸಬೇಕು ಎಂದು ತಿಳಿಸುತ್ತಾರೆ. ಇದೇ ತರಹ ಬೇರೆ ಕಂಪನಿಗಳು ಕಾಫ್ ಸಿರಪ್ ತಯಾರಿಕೆ ಮಾಡಿದರೆ ಅದರ ಮಾದರಿ ಸಂಗ್ರಹಣೆ ಮಾಡಿ ತಪಾಸಣೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದೇನೆ. ಈಗಾಗಲೇ ಪ್ರಕ್ರಿಯೆ ಆರಂಭವಾಗಿದೆ. ಒಂದೆರಡು ದಿನದಲ್ಲಿ ಅದರ ರಿಪೋರ್ಟ್ ಬರುತ್ತದೆ, ಎಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು.